ಇಂದು ತೆನ್ನಿಹಳ್ಳಿ ಗ್ರಾ.ಪಂ.ಕಾರ್ಯಾಲಯ ಉದ್ಘಾಟನೆ

ವಿಜಯಪುರ: ‘ಗಾಂಧಿ ಗ್ರಾಮ’ ಪುರಸ್ಕೃತ ಇಂಡಿ ತಾಲ್ಲೂಕಿನ ತೆನ್ನಿಹಳ್ಳಿ ಗ್ರಾಮ ಪಂಚಾಯ್ತಿಯ ನೂತನ ಕಾರ್ಯಾಲಯ ಉದ್ಘಾಟನಾ ಕಾರ್ಯಕ್ರಮ ಜೂನ್ 27ರಂದು ಬೆಳಿಗ್ಗೆ 11 ಗಂಟೆಗೆ ನಡೆಯಲಿದೆ ಎಂದು ಪಿಡಿಒ ಬಸವರಾಜ ಬಬಲಾದ ತಿಳಿಸಿದ್ದಾರೆ.
2021-22ನೇ ಸಾಲಿನ ಮಹತ್ಮ ಗಾಂಧಿ ನರೇಗಾ ಯೋಜನೆಯಡಿಯಲ್ಲಿ ಸುಂದರವಾಗಿ ಹಾಗೂ ಆಕರ್ಷಕವಾಗಿ ನಿರ್ಮಾಣವಾಗಿರುವ ಗ್ರಾಮ ಪಂಚಾಯ್ತಿ ನೂತನ ಕಾರ್ಯಾಲಯವನ್ನು ಶಾಸಕ ಯಶವಂತರಾಯಗೌಡ ಪಾಟೀಲ ಉದ್ಘಾಟಿಸಲಿದ್ದಾರೆ.
ಗೊರನಾಳ ಹಿರೇಮಠದ ಡಾ.ವಿರೂಪಾಕ್ಷ ದೇವರು ಕಾರ್ಯಕ್ರಮದ ಸಾನ್ನಿಧ್ಯ ವಹಿಸಲಿದ್ದಾರೆ. ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಸುಂಗಲ ಜಿಡ್ಡಿಮನಿ ಅಧ್ಯಕ್ಷತೆ ವಹಿಸಲಿದ್ದಾರೆ.
ಗ್ರಾಮ ಪಂಚಾಯ್ತಿ ವತಿಯಿಂದ ಮೂರು ಎಕರೆ ಜಾಗದಲ್ಲಿ ನಿರ್ಮಾಣವಾಗಿರುವ ಘನ ತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣವಾಗಿದ್ದು, ರಾಜ್ಯಮಟ್ಟದ ಗಮನ ಸೆಳೆದಿದೆ.
ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಆಲ,ಅರಳಿ, ಬೇವು, ಹೊಂಗೆ, ಮಹಾಗನಿ ಸೇರಿದಂತೆ ಸುಮಾರು 25 ಕ್ಕೂ ಹೆಚ್ಚು ವಿವಿಧ ಜಾತಿಯ 9 ಸಾವಿರ ಸಸಿಗಳನ್ನು ನೆಟ್ಟಿದ್ದು, ಎಲ್ಲಾ ಸಸಿಗಳಿಗೆ ಹನಿ ನೀರಾವರಿ ವ್ಯವಸ್ಥೆ ಮಾಡಲಾಗಿದೆ ಮತ್ತು ಸುಂದರ ಉದ್ಯಾನವನ ನಿರ್ಮಾಣ ಮಾಡಲಾಗಿದೆ ಎಂದು ಬಬಲಾದ ತಿಳಿಸಿದರು.
2021-22 ನೇ ಸಾಲಿಗೆ ನರೇಗಾ ಯೋಜನೆಯಡಿಯಲ್ಲಿ ಅತ್ಯುತ್ತಮ ಸಾಧನೆ ಮಾಡಿದ್ದಕ್ಕಾಗಿ ಪಿ.ಡಿ.ಒ ಬಸವರಾಜ ಬಬಲಾದ ಅವರಿಗೆ ನರೇಗಾ ರಾಜ್ಯ ಪ್ರಶಸ್ತಿ ಲಭಿಸಿದೆ. ಅಲ್ಲದೇ, 2021-22 ನೇ ಸಾಲಿನಲ್ಲಿ ತೆನ್ನಿಹಳ್ಳಿ ಗ್ರಾಮ ಪಂಚಾಯಿತಿಗೆ ಗಾಂಧಿ ಗ್ರಾಮ ಪುರಸ್ಕಾರ ಲಭಿಸಿದೆ.