ಶಾಲಾ ಪಠ್ಯದಲ್ಲಿ 8 ಬದಲಾವಣೆ : ಆಕ್ಷೇಪಾರ್ಹ ಅಂಶಗಳನ್ನು ಕೈಬಿಟ್ಟ ಶಿಕ್ಷಣ ಇಲಾಖೆ

ಬೆಂಗಳೂರು: ಶಾಲಾ ಪಠ್ಯಪುಸ್ತಕ ಪರಿಷ್ಕರಣೆ ಸಂದರ್ಭದಲ್ಲಿ ಹಲವು ತಪ್ಪುಗಳನ್ನು ಮಾಡಲಾಗಿತ್ತು. ಈ ತಪ್ಪುಗಳನ್ನು ವಿಪಕ್ಷದ ನಾಯಕರು ಎತ್ತಿ ತೋರಿಸಿ, ಕಿಡಿಕಾರಿದ್ದರು. ಈ ಬೆನ್ನಲ್ಲೇ ರಾಜ್ಯ ಸರ್ಕಾರ ಈಗ ತಪ್ಪುಗಳನ್ನು ತಿದ್ದುಪಡಿ ಮಾಡಿದೆ.
ಇದಲ್ಲದೇ ಕೆಲ ವಿಷಯಗಳು ಬಿಟ್ಟೋಗಿದ್ದವುಗಳನ್ನು ಹೊಸದಾಗಿ ಸೇರ್ಪಡೆ ಮಾಡಲಾಗಿದೆ.
ಈ ಕುರಿತಂತೆ ಶಿಕ್ಷಣ ಇಲಾಖೆಯ ( Education Department ) ಸರ್ಕಾರದ ಅಧೀನ ಕಾರ್ಯದರ್ಶಿ ಹೆಚ್ ಎಸ್ ಶಿವಕುಮಾರ್ ನಡವಳಿಗಳನ್ನು ಹೊರಡಿಸಿದ್ದು, ಈಗಾಗಲೇ ಪರಿಷ್ಕರಿಸಿರುವ ಪಠ್ಯಪುಸ್ತಕಗಳನ್ನು ವಿದ್ಯಾರ್ಥಿಗಳ ಶೈಕ್ಷಣಿಕ ಹಾಗೂ ಆಡಳಿತಾತ್ಮಕ ಹಿತದೃಷ್ಠಿಯಿಂದ ಬಿಟ್ಟುಹೋದ ಅಂಶಗಳನ್ನು ತಿದ್ದುಪಡಿ ಹಾಗೂ ಸೇರ್ಪಡೆ ಮಾಡಿ ಈ ಕೆಳಕಂಡಂತೆ ತಿದ್ದೋಲೆ ಹೊರಡಿಸಿ, ಆದೇಶಿಸಲಾಗಿದೆ ಎಂದಿದ್ದಾರೆ.
- 9ನೇ ತರಗತಿ ಸಮಾಜ ವಿಜ್ಞಾನ ಭಾಗ-01ರ ನಮ್ಮ ಸಂವಿಧಾನ ಎಂಬ ಪಾಠದಲ್ಲಿ ಸಂವಿಧಾನದ ಕರಡು ರಚನೆ ಸಮಿತಿ ಬಗ್ಗೆ ಉಲ್ಲೇಖವಿರುತ್ತದೆ. ಅದರಲ್ಲಿ ಪರಿಷ್ಕೃತ ಪಠ್ಯದಲ್ಲಿ ಇರುವ ಸಂವಿಧಾನ ರಚನೆಗೆ ನೀಡಿದ ಕೊಡುಗೆಯನ್ನು ಆಧರಿಸಿ, ಅವರನ್ನು ಸಂವಿಧಾನ ಶಿಲ್ಪಿ ಎಂದು ಕರೆಯಲಾಗಿದೆ. ಪುನರ್ ಸೇರ್ಪಡೆ ಮಾಡಲಾಗಿದೆ
- 7ನೇ ತರಗತಿ ಸಮಾಜ ವಿಜ್ಞಾನ ಭಾಗ-01ರ ಭಕ್ತಿ ಪಂಥ ಹಾಗೂ ಸೂಫಿ ಸಂತರು ಪಾಠವನ್ನು ಪೂರ್ಣವಾಗಿ ಕೈಬಿಡಲಾಗಿದೆ. 9ನೇ ತರಗತಿಯ ಸಮಾಜ ವಿಜ್ಞಾನ ವಿಷಯದ ಭಾಗ-2ರಲ್ಲಿ ಭಕ್ತಿ ಪಂಥ ಎಂಬ ಅಧ್ಯಾಯದಲ್ಲಿ ಪುರಂದರದಾಸರು, ಕನಕದಾಸರ ಕುರಿತು ವಿಷಯಗಳು ಸಂಕ್ಷಿಪ್ತಗೊಳಿಸಲಾಗಿದೆ. ಆದ್ದರಿಂದ 2021-22ನೇ ಸಾಲಿನ 7ನೇ ತರಗತಿಯ ಸಮಾಜ ವಿಜ್ಞಾನ ಭಾಗ-01ರ ಭಕ್ತಿ ಪಂಥ ಹಾಗೂ ಸೂಫಿ ಸಂತರು ಸಂಪೂರ್ಣ ಪಾಠ ಸೇರ್ಪಡೆ ಮಾಡಲಾಗಿರೋದಾಗಿ ತಿಳಿಸಿದೆ.
- 7ನೇ ತರಗತಿಯ ಪ್ರಥಮ ಭಾಷೆ ಕನ್ನಡ ಪಠ್ಯಪುಸ್ತಕದ ಪುಟ ಸಂಖ್ಯೆ 147ರಲ್ಲಿ ಗೊಂಬೆ ಕಲಿಸುವ ನೀತಿ ಪದ್ಯದ ಕೃತಿಕಾರರ ಹೆಸರು ಡಾ.ಆರ್ ಎನ್ ಜಯಗೋಪಾಲ್ ಎಂಬ ತಪ್ಪನ್ನು ಸರಿ ಪಡಿಸಿ, ಮೂಲ ಕೃತಿಕಾರ ಚಿ.ಉದಯಶಂಕರ್ ಹೆಸರು ಸೇರಿಸಲಾಗಿದೆ.
- 6ನೇ ತರಗತಿ ಸಮಾಜ ವಿಜ್ಞಾನ ಭಾಗ-1ರ ಪಾಠ ನಮ್ಮ ಹೆಮ್ಮೆಯ ರಾಜ್ಯ ಕರ್ನಾಟಕ ಪಾಠದಲ್ಲಿ ಸಿದ್ಧಗಂಗಾ ಮಠ ಹಾಗೂ ಆದಿಚುಂಚನಗಿರಿ ಮಠದ ಕುರಿತಾದ ಸೇವೆಯ ಸಾಲುಗಳನ್ನು ಸೇರಿಸಲಾಗಿದೆ.
- 7ನೇ ತರಗತಿಯ ಸಮಾಜ ವಿಜ್ಞಾನ ಭಾಗ-1ರ ಮೈಸೂರು ಮತ್ತು ಇತರ ಸಂಸ್ಥಾನಗಳು ಎಂಬ ಪಾಠದಲ್ಲಿದ್ದ ಸುರಪುರ ನಾಯಕ ಕುರಿತಾತ ವಿವರಗಳನ್ನು ಸರಿ ಮಾಡಲಾಗಿದೆ.
- 9ನೇ ತರಗತಿಯ ಸಮಾಜ ವಿಜ್ಞಾನ ಭಾಗ-1ರ ಪಠ್ಯಪುಸ್ತಕದಲ್ಲಿ ಭಾರತದ ಮತ ಪರಿವರ್ತಕರು ಎಂಬ ಅಧ್ಯಾಯದಲ್ಲಿ ಬಸವಣ್ಣನವರ ಕುರಿತಾದ ವಿಷಯಾಂಶ ಸೇರಿಸಲಾಗಿದೆ.
- 7ನೇ ತರಗತಿ ಸಮಾಜ ವಿಜ್ಞಾನ ಭಾಗ-2ರ ಪಠ್ಯಪುಸ್ತಕದ ಕರ್ನಾಟಕ ರಾಜ್ಯ ಏಕೀಕರಣ ಹಾಗೂ ಗಡಿವಿವಾದಗಳು ಎಂಬ ಪಾಠದ ರಾಷ್ಟ್ರಕವಿ ಕುವೆಂಪು ಅವರ ಹಾಗೂ ಹುಯಿಲಗೋಳ ನಾರಾಯಣರಾವ್ ಅವರ ಭಾವಚಿತ್ರಗಳನ್ನು ಸೇರಿಸಲಾಗಿದೆ.
- 4ನೇ ತರಗತಿಯ ಪರಿಸರ ಅಧ್ಯಯನ ಪ್ರತಿಯೊಬ್ಬರು ವಿಶಷ್ಟ ಎಂಬ ಪಾಠದಲ್ಲಿ ಸಾಹಿತ್ಯ ಕ್ಷೇತ್ರದಲ್ಲಿ ಹೆಸರು ಮಾಡಿದ ಕುವೆಂಪು ಅವರಿಗೆ ಚಿಕ್ಕಂದಿನಿಂದಲೂ ಕಥೆ, ಕವನ, ಪುಸ್ತಕ ಓದು, ಬರೆಯುವ ಅಭ್ಯಾಸ ಇತ್ತು ಎಂಬ ವಾಕ್ಯದ ನಂತ್ರ ಅನೇಕರ ಪ್ರೋತ್ಸಾಹದಿಂದ ಇವರು ಮುಂದೆ ಪ್ರಖ್ಯಾತ ಕವಿ ಎನಿಸಿಕೊಂಡರು ಎಂಬ ಸಾಲನ್ನು ಕೈಬಿಡಲಾಗಿದೆ
ಈ ಎಲ್ಲಾ ತಿದ್ದುಪಡಿ, ಮರು ಸೇರ್ಪಡೆ ಮಾಡಲಾಗಿದೆ. ಈ ವಿಷಯಗಳನ್ನು ಕರ್ನಾಟಕ ಪಠ್ಯಪುಸ್ತಕ ಸಂಘದ ಜಾಲತಾಣದಲ್ಲಿ ಪ್ರಕಟಿಸಲಾಗಿದೆ. ಅಗತ್ಯವಿರುವ ತಿದ್ದೋಲೆ ಪ್ರತಿಗಳನ್ನು ಮುದ್ರಿಸಲು ಕರ್ನಾಟಕ ಪಠ್ಯಪುಸ್ತಕ ಸಂಘದಿಂದ ಈಗಾಗಲೇ ಪಠ್ಯಪುಸ್ತಕಗಳ ಮುದ್ರಣಕ್ಕೆ ಕಾರ್ಯಾದೇಶ ಪಡೆದಿರುವ ಎಲ್-1 ದರ ನಮೂದಿಸಿರುವ ಮುದ್ರಕರಿಂದ ಕರ್ನಾಟಕ ಪಠ್ಯಪುಸ್ತಕ ಸಂಘದಲ್ಲಿ ಲಭ್ಯವಿರುವ ಅನುದಾನದಿಂದ ಭರಿಸಿ, ಎಲ್ಲಾ ಸರ್ಕಾರಿ, ಅನುದಾನಿತ ಶಾಲೆಗಳಿಗೆ ಹಾಗೂ ಅನುದಾನರಹಿತ ಶಾಲೆಗಳಿಗೆ ಉಚಿತವಾಗಿ ತಲಾ ಒಂದು ಪ್ರತಿಯಂತೆ ವಿತರಿಸುವುದು ಎಂದು ತಿಳಿಸಿದೆ.