fbpx
Karnataka News

ಪಿಎಸ್‌ಐ ಹಗರಣ: ಅಮೃತ್‌ ಪೌಲ್‌ರನ್ನು ಮತ್ತೆ ಮೂರು ದಿನ ಸಿಐಡಿ ವಶಕ್ಕೆ

ಪೊಲೀಸ್‌ ಸಬ್‌ ಇನ್‌ಸ್ಪೆಕ್ಟರ್‌ (ಪಿಎಸ್‌ಐ) ನೇಮಕಾತಿ ಹಗರಣದಲ್ಲಿ ಬಂಧಿತರಾಗಿ ಅಮಾನತುಗೊಂಡಿರುವ ಪೊಲೀಸ್‌ ನೇಮಕಾತಿ ವಿಭಾಗದ ಹೆಚ್ಚುವರಿ ಪೊಲೀಸ್‌ ಮಹಾನಿರ್ದೇಶಕ ಅಮೃತ್‌ ಪೌಲ್‌ ಅವರನ್ನು ಬೆಂಗಳೂರಿನ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯವು ಬುಧವಾರ ಮತ್ತೆ ಮೂರು ದಿನಗಳ ಕಾಲ ಅಪರಾಧ ತನಿಖಾ ದಳದ (ಸಿಐಡಿ) ವಶಕ್ಕೆ ನೀಡಿದೆ.

ಜುಲೈ 5ರಂದು ಬಂಧನಕ್ಕೆ ಒಳಗಾಗಿದ್ದ ಪೌಲ್‌ ಅವರನ್ನು ಬೆಂಗಳೂರಿನ ಒಂದನೇ ಹೆಚ್ಚುರಿ ಮುಖ್ಯ ಮೆಟ್ರೊಪಾಲಿಟನ್‌ ನ್ಯಾಯಾಧೀಶರಾದ ಆನಂದ್‌ ಟಿ. ಚವ್ಹಾಣ್‌ ಅವರು 10 ದಿನಗಳ ಕಾಲ ಪೊಲೀಸ್‌ ವಶಕ್ಕೆ ನೀಡಿದ್ದರು. ಇಂದು ಪೌಲ್‌ ಅವರ ಪೊಲೀಸ್‌ ವಶದ ಅವಧಿ ಮುಗಿದ ಹಿನ್ನೆಲೆಯಲ್ಲಿ ಅವರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು.

ಸಿಐಡಿ ಪೊಲೀಸರು ಹೆಚ್ಚುವರಿಯಾಗಿ ಐದು ದಿನ ಪೌಲ್‌ ಅವರನ್ನು ತನಿಖೆಗೆ ಒಳಪಡಿಸಲು ವಶಕ್ಕೆ ನೀಡಬೇಕು ಎಂದು ಕೋರಿದರು. ಇದಕ್ಕೆ ಒಪ್ಪದ ನ್ಯಾಯಾಧೀಶರಾದ ಆನಂದ್‌ ಟಿ. ಚವ್ಹಾಣ್‌ ಅವರು ಮೂರು ದಿನ ಪೌಲ್‌ ಅವರನ್ನು ಸಿಐಡಿ ಪೊಲೀಸರಿಗೆ ಒಪ್ಪಿಸಿದರು.

ಪ್ರಶ್ನೆ ಪತ್ರಿಕೆ ಮತ್ತು ಓಎಂಆರ್‌ ಶೀಟ್‌ ಹಾಗೂ ಸ್ಟ್ರಾಂಗ್‌ ರೂಮ್‌ನಲ್ಲಿ ಅಕ್ರಮ ಎಸಗಿರುವುದಕ್ಕೆ ಸಂಬಂಧಿಸಿದಂತೆ ಸಂಗ್ರಹಿಸಿದ ಸಾಕ್ಷ್ಯವನ್ನು ಆಧರಿಸಿ ನೇಮಕಾತಿ ವಿಭಾಗದ ಮುಖಸ್ಥ ಪೌಲ್‌ ಅವರನ್ನು ಬಂಧಿಸಲಾಗಿದೆ ಎನ್ನಲಾಗಿದೆ.

545 ಪಿಎಸ್‌ಐ ಹುದ್ದೆ ನೇಮಕಾತಿಗೆ ನಡೆದ ಪರೀಕ್ಷೆಯನ್ನು 54,287 ಅಭ್ಯರ್ಥಿಗಳು ಎದುರಿಸಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿಯು 50ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಿದೆ. ಕಲ್ಯಾಣ ಕರ್ನಾಟಕ ವಿಭಾಗದಿಂದ ಆಯ್ಕೆಯಾಗಿದ್ದ 67 ಮಂದಿಯ ಪೈಕಿ ವೀರೇಶ್‌ ಎನ್‌ ಎಂಬ ಅಭ್ಯರ್ಥಿಯು ಏಳನೇ ರ್ಯಾಂಕ್‌ ಪಡೆದಿದ್ದರು. ಆತನ ಓಎಂಆರ್‌ ಹಾಳೆಯ ಕಾರ್ಬನ್‌ ಕಾಪಿಯಲ್ಲಿ 150 ಅಂಕಗಳಿಗೆ ನಿಗದಿಯಾಗಿದ್ದ 100 ಪ್ರಶ್ನೆಗಳನ್ನು ಒಳಗೊಂಡಿದ್ದ ಬಹು ಪ್ರಶ್ನೆ ಪತ್ರಿಕೆಯಲ್ಲಿ ಕೇವಲ 21 ಪ್ರಶ್ನೆಗಳಿಗೆ ಉತ್ತರಿಸಿದ್ದರೂ ವೀರೇಶ್‌ಗೆ 121 ಅಂಕ ನೀಡಲಾಗಿತ್ತು. ಇದು ಇಡೀ ಹಗರಣ ಬೆಳಕಿಗೆ ಬರಲು ನಾಂದಿ ಹಾಡಿತ್ತು. ಆನಂತರ ಹಗರಣಕ್ಕೆ ಸಂಬಂಧಿಸಿದಂತೆ ಕಲಬುರ್ಗಿಯ ಚೌಕ್‌ ಮತ್ತು ಸ್ಟೇಷನ್‌ ಬಜಾರ್‌ ಠಾಣೆ, ಬೆಂಗಳೂರಿನ ಹೈಗ್ರೌಂಡ್ಸ್‌ ಸೇರಿದಂತೆ ಹಲವು ಕಡೆ ಆರೋಪಿಗಳ ವಿರುದ್ಧ ಪ್ರತ್ಯೇಕ ಎಫ್‌ಐಆರ್‌ ದಾಖಲಿಸಿ, ತನಿಖೆ ನಡೆಸಲಾಗುತ್ತಿದೆ.

ಕಲಬುರ್ಗಿಯಲ್ಲಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಪೊಲೀಸರು ವಿಚಾರಣಾಧೀನ ನ್ಯಾಯಾಲಯಕ್ಕೆ ಸುಮಾರು 2 ಸಾವಿರ ಪುಟಗಳ ಆರೋಪ ಪಟ್ಟಿಯನ್ನು ಈಚೆಗೆ ಸಲ್ಲಿಸಿದ್ದಾರೆ.

flash24x7.com

Tousif M Mulla National President public Rights Cell International Humanity Rights & Media Organizationn Karnataka Human Rights Awareness Forum Mumbai Karnataka Mainorite President Karnataka Human Rights Panel Belagavi District Vice President 99Indianews Belagavi District Reporter Indian News Voice Of Nation INVN News

Related Articles

Leave a Reply

Your email address will not be published. Required fields are marked *

error: Content is protected !!
%d